ರಾಜ್ಯದಾದ್ಯಂತ ಸೆಪ್ಟೆಂಬರ್ ಮಾಹೆಯಿಂದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ. ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ವರುಣ ದೇವ ಅಬ್ಬರಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿಗಳು ನೀಡಿದ ಮಾಹಿತಿಯಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲರ್ಬುಗಿ, ವಿಜಯಪುರ, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೆಳಲ್ಲಿ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನೂ ಸೆ.13 ರ ಬಳಿಕ ಮುಂಗಾರು ಮತಷ್ಟು ಚುರುಕಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಮೈಸೂರು, ರಾಮನಗರ, ಶಿವಮೊಗ್ಗ, ಮಂಡ್ಯ, ಕೋಲಾರ, ತುಮಕೂರು ಭಾಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇನ್ನೂ ಈ ಆಗಸ್ಟ್ ಮಾಹೆಯಲ್ಲಿ ಕೈಕೊಟ್ಟಿದ್ದ ವರುಣ ಸೆಪ್ಟೆಂಬರ್ ಮಾಹೆಯಲ್ಲಿ ಕರುಣೆ ತೋರಿದ್ದು, ಮತಷ್ಟು ಮಳೆಯಾಗಲಿದೆ. ಸದ್ಯ ಅಳಿದು ಉಳಿದು ಬೆಳೆಯಾದರು ಕೈಗೆ ಸಿಗುತ್ತಾ ಎಂಬ ಚಿಂತೆಯಲ್ಲಿ ರೈತನಿದ್ದಾನೆ.